A r v i n d r a j   D e s a i
Showing posts with label ಬೆಂಗಳೂರು. Show all posts
Showing posts with label ಬೆಂಗಳೂರು. Show all posts

Monday, January 12, 2015

ಸಂಕ್ರಾಂತಿ ಬಂತು : ಎಳ್ಳು ತಿಂದು ಒಳ್ಳೊಳ್ಳೆ ಮಾತಾಡಿ

ನನ್ನ ಬಾಲ್ಯದ ನೆನಪುಗಳನ್ನೆಲ್ಲಾ ಟೇಬಲ್ ಮೇಲೆ ಹರವಿಕೊಂಡು, ಪೆನ್ನು ಹಿಡಿದು ಬ್ಲಾಗ್ ಬರೆಯಲು ಶುರು ಮಾಡಿದ್ದೇನೆ. ನಾನು ಚಿಕ್ಕವನಿದ್ದಾಗಿನ ನೆನಪು. ಸಂಕ್ರಾಂತಿ ಬಂತೆಂದರೆ, ಎಳ್ಳು ಸಕ್ಕರೆ ಅಥವಾ ಬೆಲ್ಲದ ಚೂರುಗಳನ್ನು ಒಂದು ಸ್ಟೀಲ್ ಡಬ್ಬದಲ್ಲಿ ಹಾಕಿಕೊಂಡು, ನನ್ನ ಅಪ್ಪಾಜಿ ಹೇಳಿಕೊಟ್ಟ ವಾಕ್ಯ "ಎಳ್ಳು ತಿಂದು ಒಳ್ಳೊಳ್ಳೆ ಮಾತಾಡಿ" ಎಂದು ಸರಿಸುಮಾರು ಎಲ್ಲರಿಗೂ ಶುಭಾಶಯ ಕೋರುತ್ತಾ ಊರೆಲ್ಲ ತಿರುಗಿ ಬಿಡುತ್ತಿದ್ದೆ. ಚಿಕ್ಕವರಾಗಿದ್ದಾಗ ಮುಗ್ಧತೆಯಿಂದ ಎಲ್ಲ ಮನೆಯನ್ನು ಭೇಟಿಯಾಗಿ ಎಳ್ಳು ಕೊಡುವುದು ಒಂದು ಸಂಭ್ರಮ.
       ಹಬ್ಬಗಳು ಬಂತೆಂದರೆ ನನಗಂತೂ ಫುಲ್ ಖುಷಿ. ಹಬ್ಬದ ದಿನದಂದು ಮದುವೆ ಮನೆಯ ವಾತಾವರಣ. ನನ್ನ ಅವ್ವನಿಗಂತೂ ಭರಪೂರ ಕೆಲಸ. ಪೂಜೆ ಆಗುವವರೆಗೂ ತಿನ್ನಲು ಏನೂ ಕೊಡುವುದಿಲ್ಲ ಎಂದು ನನ್ನವ್ವ ಹೇಳಿದಾಗ, ಹೊಟ್ಟೆ ಚುರುಗುಟ್ಟುತ್ತಾ ಹುಸಿ ಕೋಪದಿಂದ ಕಾಯುತ್ತಿದ್ದುದೇ ಸಂಭ್ರಮ. ಚಳಿಗಾಲದಲ್ಲಿ ಮೈಯಲ್ಲಾ ಬಿರುಕು ಬಿಟ್ಟು, ನಂತರ ಸಂಕ್ರಮಣ ಬಂದಾಗ, ಎಳ್ಳು ಎಣ್ಣೆಯ ಅಂಶವನ್ನು ಮೈಯಲ್ಲಿ ಬೆರೆಸುತ್ತದೆ ಎಂದು ವೈಜ್ಞಾನಿಕ ಟಿಪ್ಪಣೆ ಕೊಟ್ಟು, ಅಪ್ಪ ಸ್ವತಃ ತಾನೇ ನನ್ನನ್ನು ಸ್ನಾನ ಮಾಡಿಸುತ್ತಿದ್ದರು, ಅದೇ ಸಂಭ್ರಮ.
          ನನ್ನವ್ವ ಎಳ್ಳನ್ನು ಹಸನು ಮಾಡಿ, ಬಿಸಿಲಿಗೆ ಕಾಯಿಸಿ, ಅದರಲ್ಲಿ ಬೆಲ್ಲ ಬೆರೆಸಿ ಎಳ್ಳು ಹೋಳಿಗೆ ಮಾಡಿ, ತಿನ್ನಲು ಕೊಟ್ಟಾಗ ಅದಕ್ಕಿಂತ ಸಂಭ್ರಮ ಇನ್ನೊಂದಿಲ್ಲ. ನನ್ನ ಅಣ್ಣ ಸೈನಿಕ ಶಾಲೆಯಲ್ಲಿ ಓದುತ್ತಿದ್ದಾಗ ಸಂಕ್ರಮಣದ ಮೆರವಣಿಗೆಗೆ ನಾನೇ ರಾಜ. ಅಣ್ಣನಿಲ್ಲದೇ ಕಳೆದ ಎಲ್ಲಾ ಸಂಕ್ರಾಂತಿಗಳಲ್ಲೂ ಆತನ ಕೊರತೆ ಕಾಡುತ್ತಿರುತ್ತಿತ್ತು. ಆದರೆ ನನ್ನ ಅಪ್ಪಾಜಿ, ಅಪ್ಪನಾಗಿ ಅಗತ್ಯ ಬಿದ್ದಾಗ ಅಣ್ಣನಾಗಿ, ಸ್ನೇಹಿತನಾಗಿ ಕೊರತೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರು.


     ನಾನು ಚಿಕ್ಕವನಾಗಿದ್ದಾಗಿನಿಂದ ಹಿಡಿದು, ಇಲ್ಲಿಯವರೆಗೆ ಹಲವಾರು ಬದಲಾವಣೆಗಳನ್ನು ನೋಡುತ್ತಾ ಬಂದಿದ್ದೇನೆ. ನನ್ನ ಅವ್ವ ಮನೆಯಂಗಳದಲ್ಲಿ ಒಂದು ದೊಡ್ಡ ಹಂಡೆ ಹಿಡಿಯುವಷ್ಟು ಜಾಗದಲ್ಲಿ ರಂಗೋಲಿ ಹಾಕುತ್ತಾಳೆ. ಬೆಂಗಳೂರಿನ ಹೆಣ್ಣುಮಕ್ಕಳು ಅಪಾರ್ಟಮೆಂಟ್ ನಲ್ಲಿ ರಂಗೋಲಿ ಹಾಕಲು ಜಾಗ ಹುಡುಕುತ್ತಿರುತ್ತಾರೆ. ನನ್ನವ್ವ ಎಳ್ಳು ಬೆಲ್ಲ ಸೇರಿಸಿ ಉಂಡೆ ಮಾಡಿ ಕೊಡುತ್ತಿದ್ದರೆ, ನನ್ನ ಅಕ್ಕ ಸುಜಾತಾ ಮನೆಯಿಂದಲೇ ಎಳ್ಳುಂಡೆ ಮಾಡಿಸಿ ಮಕ್ಕಳಿಗೆ ಕೊಡುತ್ತಾಳೆ, ಇದೂ ಒಂಥರಾ ಔಟ್ ಸೋರ್ಸಿಂಗ್. ಆಗ ಊರ ತುಂಬೆಲ್ಲಾ ಎಳ್ಳು ಹಂಚುತ್ತಿದ್ದೆವು, ಈಗ ಪಕ್ಕದ ಮನೆಯವರಿಗೂ ಕೊಡುವ ಪದ್ಧತಿ ಇಲ್ಲ. ಆಗ 'ಚರಿಗೆ ಚಲ್ಲು' ವಂಥಾ ಕಾರ್ಯಕ್ರಮಗಳನ್ನೂ ಆಚರಿಸಿದ್ದಿದೆ., ಈಗ ಯಾರ ಮನೆ, ಹೊಲಗಳಲ್ಲೂ ಇದು ಕಾಣ ಸಿಗುವುದಿಲ್ಲ. ಎಳ್ಳು ಬೆಲ್ಲವನ್ನು ಸಂಭಂಧಿಕರಿಗೆ ಸ್ಟೀಲ್ ಡಬ್ಬಿಯಲ್ಲಿ ಹಾಕಿ ಕೊಟ್ಟು ಬರುವ ಪದ್ಧತಿಯುತ್ತು, ಈಗೆಲ್ಲ ಎಳ್ಳು ಬೆಲ್ಲ ಚಿತ್ರ ಬಿಡಿಸಿ ಮೊಬೈಲಿನಲ್ಲಿ ಕಳುಹಿಸುವ ಸಮಯ ಬಂದೊದಗಿದೆ. ಹಬ್ಬದ ದಿನದಂದು ಮೆಸೇಜಿಗೆ ಒಂದು ರೂಪಾಯಿ ಮಾಡಿದಾಗಿನಿಂದ ಮೆಸೇಜೂ ಕಡಿಮೆಯಾಗಿಬಿಟ್ಟಿದೆ. ಈಗೇನಿದ್ದರೂ ಫೆಸ್ ಬುಕ್ , ವಾಟ್ಸ್ ಆಪ್.
     ಬದಲಾವಣೆ ಜಗದ ನಿಯಮ. ಕಾಲಕ್ಕೆ ತಕ್ಕಂತೆ ಆಚರಣೆಗಳೂ ಬದಲಾಗಬೇಕು. ಹಾಗಂತ ಹೋಳಿಗೆ ಬದಲಾಗಿ ಫಿಜ್ಜಾ ಆಗಲಿ, ಪಾಯಸದ ಬದಲಾಗಿ ಕೂಲ್ ಡ್ರಿಂಕ್ಸ್ ಬರಬಾರದು. ಹಬ್ಬದ ಆಚರಣೆಯಲ್ಲಿ ಬದಲಾವಣೆ ಮಾಡಿದರೂ ಸಂಭ್ರಮಕ್ಕೆ ಚ್ಯುತಿ ಬರಬಾರದು. ಅಜ್ಜಿಯರು ಮೊಮ್ಮಕ್ಕಳಿಗೊಸ್ಕರ ವಾದರೂ ಆಚರಣೆಗಳನ್ನು ಆಚರಿಸಿ, ಅದರ ಮಹತ್ವ ಕಾಪಾಡಬೇಕು. ಬಹುಷಃ ಪೀಳಿಗೆಯಿಂದ ಪೀಳಿಗೆಗೆ ನಾವು ಕೊಡುವ ಕೊಡುಗೆ ಇದೇ . ಹಿರಿಯರು ಈ ಹಬ್ಬಗಳನ್ನು ಯಾವುದೇ ಕಾರಣವಿಲ್ಲದೆ ಆಚರಣೆ ಮಾಡುವಂಥ ದಡ್ಡರಲ್ಲ. ಅವರು ಹಾಕಿಕೊಟ್ಟ ದಾರಿಯಲ್ಲಿ ಕೆಟ್ಟದಂತೂ ಇಲ್ಲ,.
        ಹಬ್ಬಗಳು ಬರೀ ರುಚಿಯಾದ ತಿಂಡಿ ತಿನ್ನುವ ನಾಲಿಗೆಗೆ ಸಂಭಂದಿಸಿದ ವಿಷಯ ಅಲ್ಲ, ಇದು ಮನಸ್ಸಿಗೆ ಸಂಭಂದಿಸಿದ ವಿಷಯವೂ ಹೌದು. ಮನಸ್ಸಿನ ಬದಲಾವಣೆಗಳಿಗೆ, ಪ್ರತಿಜ್ಞೆಗಳಿಗೆ ಒಳ್ಳೆ ದಿನ. ಸಂಕ್ರಾಂತಿಯಂತೂ ಹೇಳಿ ಮಾಡಿಸಿದ ದಿನ. ಈ ಸಂಕ್ರಾಂತಿಗೆ ಒಂದು ಪ್ರತಿಜ್ಞೆ ಮಾಡೋಣ. ಬೆಳಿಗ್ಗೆ ಎದ್ದು ಉಸಿರು ಒಳಗೆ ಎಳೆದುಕೊಳ್ಳುತ್ತಾ ನಾನು ಆರೋಗ್ಯದಿಂದ ಇದ್ದೇನೆ ಎಂದುಕೊಳ್ಳೋಣ. ಉಸಿರು ಹೊರಗೆ ಬಿಡುತ್ತಾ ಅನಾರೋಗ್ಯವೆಲ್ಲಾ ಹೊರಹಾಕುತ್ತಿದ್ದೇವೆ ಎಂದು ಕೊಳ್ಳೋಣ. ಎಳ್ಳು ಬೆಲ್ಲ ತಿಂದು ಇನ್ನೆಲ್ಲ ನಮಗೆ ಒಳ್ಳೆ ದಿನಗಳೇ, ಎಂದು ಕೊಳ್ಳೋಣ. ವ್ಯತಿಗತ ಮನಸ್ತಾಪಗಳಿಗೆ ಪೂರ್ಣ ವಿರಾಮ ಹೊಕೋಣ. ಭೂಲೋಕದಾಚೆಯ ಸ್ವರ್ಗದ ಬಾಗಿಲು ತೆರೆಯಲಿ ಬಿಡಲಿ, ನಮ್ಮೊಳಗೊಂದು ಅರಿವಿನ ಸ್ವರ್ಗದ ಬಾಗಿಲು ಇರುತ್ತದಲ್ಲ, ಅದರ ಬಾಗಿಲು ನಾವೇ ಖುದ್ದಾಗಿ ತೆರೆಯೋಣ. ಮಕರ ಜ್ಯೋತಿಯ ಹಂಗು ತೊರೆದು, ಮನದೊಳಗಿನ ಮನೆಯ ಬಾಗಿಲಲ್ಲಿ ಮಮತೆಯ ದೀಪ ಹಚ್ಚಿಡೋಣ. ಅದು ಬೆಳಗುವ ಪ್ರೀತಿಯ ಬೆಳಕಲ್ಲಿ ಕಾಣುವ ಜಗದಲ್ಲಿ ಸಣ್ಣತನಗಳಿಗೆ ಜಾಗವಿರದಿರಲಿ.
        ಮಕ್ಕಳೆಲ್ಲಾ ಊರಿಗೆ ಹೋದಾಗ, ಅಪ್ಪ ಅವ್ವಂದಿರು ಮಾಡಿ ಬಡಿಸುವ ಪ್ರೀತಿಯ ಊಟದಂತೆ, ಅಣ್ಣಂದಿರು ಪ್ರೀತಿಯಿಂದ ಮೊಟಕುವಂತೆ, ಮನಸ್ಸಿನಿಂದ ಮನಸ್ಸು ಬೆಸೆಯುವ, ಎದೆಯಿಂದ ಎದೆಗೆ ಹರಿಯುವ ಚೈತನ್ಯದ ಮಹಾಪೂರವಾಗಲಿ ಈ ಹಬ್ಬ ಸಂಕ್ರಾಂತಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.

ಇಷ್ಟವಾದರೆ ತಿಳಿಸಿ, ಇಷ್ಟವಾಗದಿದ್ದರೂ ತಿಳಿಸಿ. ಅರವಿಂದರಾಜ್ ಬಿ ದೇಸಾಯಿ

Saturday, July 2, 2011

ಬೆಂಗಳೂರು: ಭಾವನಾತ್ಮಕ ವಿದಾಯ

               ಒಂದು ಸುಂದರ ಮುತ್ಸಂಜೆಗೆ ಈ ಬರಹ ಸಾಕ್ಷಿಯಾಗುತ್ತದೆಂದು ನಾನಂದುಕೊಂಡಿರಲಿಲ್ಲ. ಇಸ್ರೋ ಲೇಔಟಿನ ಎರಡನೇ ಮಹಡಿಯ ಮೇಲ್ಛಾವಣಿಯ ಮೇಲೆ ಕುರ್ಚಿ ಹಾಕ್ಕೊಂಡು ಕುಳಿತಿದ್ದೆ. ಕಪ್ಪು ಮೋಡದ ನರ್ತನ, ಮಿಂಚು ಗುಡುಗುಗಳ ಆರ್ಭಟ, ಧೂಳು ಮತ್ತು ಹಿಮತುಕದಿಯ ಆಕ್ಸಿಡೆಂಟ್, ಮುಂಗಾರು ಮಳೆಯಾಗಿ ಪರಿವರ್ತನೆಗೊಂಡು ಭೂಮಿಯ ಮಡಿಲು ಸೇರಿತು. ಅದೇನೋ "ಪ್ರೀತಿ ಮಧುರ, ತ್ಯಾಗ ಅಮರ" ಮುಂಗಾರು ಮಳೆಯ ಮಾತು ನೆನಪಾಗಿ, ಮಳೆಯಲ್ಲಿಯೇ ನೆನೆಯುತ್ತಾ ಕುಳಿತುಬಿಟ್ಟೆ. ಮನಸ್ಸಿನಲ್ಲಿ ಏನೋ ದುಗುಡ ದುಮ್ಮಾನ. ಯಾರನ್ನೋ ಕಳೆದುಕೊಂಡ ಭಾವನೆ. ಚಿತ್ರ ವಿಚಿತ್ರ ನೆನಪುಗಳ ಲಹರಿ. ಅಣ್ಣಾವ್ರ ಹಾಡುಗಳ ಮೆಲಕು, ಆ ಚಳಿಗೆ ಮಳೆಗೆ ಟೀ ಹೀರೋಣವೆನ್ನಿಸಿತು, ಅಷ್ಟರಲ್ಲೇ ನನ್ನ ಆತ್ಮೀಯ ಗೆಳೆಯ ವಿಜಯ ಟೀಯೊಂದಿಗೆ ಪ್ರತ್ಯಕ್ಷ. ಕಳೆದುಕೊಂಡಿದ್ದೆಲ್ಲಾ ಸಿಕ್ಕಂತಾದ ಭಾವನೆ. 
ನೆನಪಿನಂಗಳದಲ್ಲಿ ರಂಗೋಲಿಯನ್ನು ಹಾಕತೊಡಗಿದೆನು. ಮಳೆಯ ನೀರಿನಲ್ಲಿ ಕಾಗದದ ದೋಣಿ ಬಿಟ್ಟಾಗಿನಿಂದ ಹಿಡಿದು ಎಲ್ಲಿಯತನಕ:-


"ಸವಿ ಸವಿ ನೆನಪು, ಸಾವಿರ ನೆನಪು, ಸಾವಿರ ಕಾಲಕು ಸವೆಯದ ನೆನಪು". 

ನಾನು ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಾಗ ಅದು ಪರವೂರು. ಈಗದು ತವರೂರಿಂತಾಗಿಬಿಟ್ಟಿದೆ. ಬೆಂಗಳೂರು ಬದುಕು ಕಲಿಸಿದೆ. ಸ್ಟೈಲ್, ಸ್ಮೈಲ್ ಕಲಿಸಿದೆ. ಆತ್ಮೀಯ ಗೆಳೆಯ, ಗೆಳತಿಯರನ್ನು ಪರಿಚಯ ಮಾಡಿಸಿದೆ. ಸೋಲು, ಗೆಲುವು ಸಹಿತ. ಮತ್ತೊಂದು ಸಾರಿ ಬೆಂಗಳೂರಿಗೆ ಬಂದಾಗ ಈ ಊರು ನನ್ನನ್ನು ತನ್ನ ಮೊಮ್ಮಗನೆಂಬುದನ್ನೇ ಮರೆತು ಬೇರೆಯವರಂತೆ ನಡೆಸಿಕೊಂಡುಬಿಡುತ್ತದೇನೋ ಎಂಬ ಭಯ.

ನಾನು ಎಲ್ಲಿಗೆ ಬಂದು ಏನು ಸಾಧಿಸಿದೆ? ಅಂಕಗಳು ನನ್ನ ಸಾಧನಾ ಮಾಪನವಾ? ಎಂಥ ನೂರೆಂಟು ಪ್ರಶ್ನೆಗಳು ನನ್ನ ಮನಸ್ಸಿನಲ್ಲಿ ಹೊರಳಾಡಿದ್ದು ಸತ್ಯ. ಜ್ಞಾನದ ಹಸಿವು ಇನ್ನೂ ಆರಿಲ್ಲ. ಆದರೂ ಪದವೀಧರ.

ನಾನು ನನ್ನ ಹುಟ್ಟಿದೂರಿಗೆ ಬರುವಾಗ ಕೊನೆಯ ಬಾರಿ ಮತ್ತೆ ಸಿಗೋಣವೆಂದು ಹೇಳಲು ಸರದಾರ ಪಟೇಲ್ ಹಾಸ್ಟೆಲಿಗೆ ಹೋದಾಗ ಎಲ್ಲ ಜೂನಿಯರ್ಸ್ ವಿದಾಯ ಹೇಳಿದ್ದು ಮರೆಯಲಾಗದ ಕ್ಷಣ. ಮತ್ತೊಂದು ಸಂಗತಿ, ನನ್ನನ್ನು ಬಸ್ ನಿಲ್ದಾಣಕ್ಕೆ ಬಿಡಲೆಂದು ಬಂದ ನನ್ನ ಸ್ನೇಹಿತರಿಗೆ ಯಾವ ರೀತಿ ಚಿರರುಣಿಯಾಗಿರಲಿ. ಬಸ್ ನಿಲ್ದಾಣಕ್ಕೆ ತಲುಪಲು ಮುಂಚೆ ಬಹಳ ರೋಚಕ ಕ್ಷಣಗಳನ್ನು ಬೈಕಿನಲ್ಲ ಕಳೆದು ತಲುಪಿದಾಗ, ಕೊನೆಯ ಬಾರಿಗೆ ಆ ದಿನದ ಟೀ ಕರುಳಿನ  ಆಳಕ್ಕೆ ಇಳಿದು ನಿರಾಳ ಎನಿಸಿತು. ಬಸ್ ಹೊರಟು ನಿಂತಾಗ, ಯಾವುದೋ ಭಾರ ಮನಸ್ಸಿನ ಮೇಲೆ ಬಿದ್ದಂತಾಯಿತು. ಮತ್ತೆ ಮತ್ತೆ ಭೇಟಿಯಾಗಲೇಬೇಕೆಂಬ ಆಣೆ ಪ್ರಮಾಣದೊಂದಿಗೆ ನನ್ನನ್ನು ಅಲ್ಲಿಂದ ಬೀಳ್ಕೊಡಲಾಯಿತು. ಭಾವನಾಜೀವಿಯಾದ ನಾನು, ನಿಮ್ಮ ಸ್ನೇಹದ ಮೇಲೆ ಎಲ್ಲಿಲ್ಲದ ಪ್ರೀತಿ ಗೌರವ.
ಈ ಎಲ್ಲಾ ಭಾವನಾತ್ಮಕ ವಿದಾಯವನ್ನು ಬೆಂಗಳೂರಿಗೆ ಅರ್ಪಿಸುವಾಗ ಕಣ್ ಹನಿಯು ಭೂಮಡಿಲು ಸೇರಿತು.

"ಯುಗ ಯುಗಗಳೇ ಸಾಗಲಿ, ನಮ್ಮ ಸ್ನೇಹ ಶಾಶ್ವತ" ಎಂದು ಮನ ಹೇಳಿತು.

ಯಾರು ಯಾರಿಗೂ ಶಾಶ್ವತ ಅಲ್ಲ, ಮುಂದೊಂದು ದಿನ ನನ್ನ ಕಣ್ಣೀರ ಕಟ್ಟೆಯೊಡೆದಾಗ ನಿಲ್ಲಿಸಲು, ಮತ್ತು ಸಾಧನೆ ಮಾಡಿದಾಗ ಖುಷಿ ಪಡಲು ನನ್ನ ಆತ್ಮೀಯ ಸ್ನೇಹಿತರು ಯಾವತ್ತೂ ನನ್ನೊಂದಿಗಿರುತ್ತಾರೆಂಬ ನಂಬಿಕೆಯಿಂದ,
"ಇಲ್ಲಿಗೆ ಮುಗಿದಿಲ್ಲ ಜೀವನ, ಮುಂದಿದೆ ಮಹಾಯುದ್ಧ",
ನಿಮ್ಮ ಹಾರೈಕೆ ನನ್ನನ್ನು ಆ ಮಹಾಯುದ್ಧದಲ್ಲಿ ಗೆಲ್ಲಿಸುತ್ತದೆಂಬ ಆತ್ಮವಿಶ್ವಾಸ ನನ್ನಲ್ಲಿದೆ.

ನಿಮ್ಮ ಪ್ರೀತಿಯ ಸ್ನೇಹಿತ,
ಅರವಿಂದರಾಜ ಬಿ ದೇಸಾಯಿ.